ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು
ಚೆನ್ನೈ: ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಪೆರಿಯಪಾಳ್ಯಂ ಸಮೀಪದ ಸಮುದ್ರಾಹಾರ ಸಂಸ್ಕರಣೆ ಮತ್ತು ರಫ್ತು ಘಟಕದಲ್ಲಿ ಭಾನುವಾರ ಶಂಕಿತ ಅಮೋನಿಯಾ ಅನಿಲ ಸೋರಿಕೆಯಿಂದ ಆರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ವೇಳೆ ಕಾರ್ಖಾನೆಯಲ್ಲಿ ಸುಮಾರು 120 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅಸ್ಸಾಂ, ಒಡಿಶಾ ಮತ್ತು ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರೂ ಘಟಕದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೈತ್ಯೀಕರಣ ವ್ಯವಸ್ಥೆಯಿಂದ ಅಮೋನಿಯಾ ಅನಿಲ ಸೋರಿಕೆಯಾಗಿ ಕಾರ್ಖಾನೆಯ ವಿವಿಧ ಭಾಗಗಳಿಗೆ ಹರಡಿದೆ ಎನ್ನಲಾಗಿದೆ. ಅನಿಲದ ಪರಿಣಾಮ ಕಾರ್ಮಿಕರಿಗೆ ಉಸಿರಾಟದ ತೊಂದರೆ, ತಲೆತಿರುಗುವಿಕೆ ಮತ್ತು ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಕೆಲವರು ಕುಸಿದು ಬಿದ್ದಿದ್ದಾರೆ.

ತುರ್ತು ರಕ್ಷಣಾ ತಂಡಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಮಿಕರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದರು. ಗಂಭೀರ ಸ್ಥಿತಿಯಲ್ಲಿರುವ ಕೆಲವರನ್ನು ಚೆನ್ನೈನ ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಘಟನೆಯ ಕುರಿತು ತಮಿಳುನಾಡು ಸರ್ಕಾರ ತಕ್ಷಣ ತನಿಖೆಗೆ ಆದೇಶಿಸಿದ್ದು, ಮೂರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಲಾಗಿದೆ. 24 ಗಂಟೆಗಳೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಸುರಕ್ಷತಾ ನಿಯಮಗಳ ಉಲ್ಲಂಘನೆ ಅಥವಾ ನಿರ್ವಹಣಾ ಲೋಪದಿಂದ ದುರಂತ ಸಂಭವಿಸಿತೇ ಎಂಬುದರ ಬಗ್ಗೆ ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.