ನೀಟ್ ಹಗರಣ ವಿರೋಧಿಸಿ ಪ್ರಧಾನಿ ನಿವಾಸ ಬಳಿ ಧರಣಿ; ರಾಹುಲ್ ಸೇರಿ ಪ್ರತಿಪಕ್ಷಗಳ ನಾಯಕರು ಪೊಲೀಸ್ ವಶಕ್ಕೆ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಸಮೀಪ ನಡೆದ ವಿರೋಧ ಪಕ್ಷಗಳ ಧರಣಿಯನ್ನು ದೆಹಲಿ ಪೊಲೀಸರು ಮಂಗಳವಾರ ಸಂಜೆ ತೆರವುಗೊಳಿಸಿದ್ದಾರೆ. ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ.

ಕಾಂಗ್ರೆಸ್ ಹಾಗೂ ‘ಇಂಡಿಯಾ’ ಮೈತ್ರಿಕೂಟದ ನಾಯಕರು ರಾತ್ರಿಯಿಡೀ ಧರಣಿ ಮುಂದುವರಿಸುವುದಾಗಿ ಘೋಷಿಸಿದ್ದರು. ಆದರೆ ಸಂಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದರು. ಈ ವೇಳೆ ರಸ್ತೆಯಲ್ಲೇ ಕುಳಿತ ರಾಹುಲ್ ಗಾಂಧಿ, ತಮ್ಮ ಬೇಡಿಕೆಗಳು ಈಡೇರುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಪೊಲೀಸರು ಅವರನ್ನು ಬಲವಂತವಾಗಿ ಬಸ್ಗೆ ಕರೆದೊಯ್ದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದವೂ ನಡೆಯಿತು. ಪೊಲೀಸ್ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.