ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದ ಪ್ರತಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಐದು ಸದಸ್ಯರ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ಅರಮನೆ ಮೈದಾನದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಿದ ಬಳಿಕ ಅವರು ಮಾತನಾಡಿದರು.
ರಾಜ್ಯದ 7 ಸಾವಿರ ಪಂಚಾಯಿತಿಗಳು ಮತ್ತು 4 ಸಾವಿರ ವಾರ್ಡ್ಗಳಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಿ, ಫಲಾನುಭವಿಗಳ ದಾಖಲೆಗಳ ಮರುಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು. ಈ ಮೂಲಕ ಹೊಸ ನಾಯಕತ್ವ ಬೆಳೆಸುವ ಉದ್ದೇಶ ಹೊಂದಿರುವುದಾಗಿ ಹೇಳಿದರು.
2028ರ ವಿಧಾನಸಭೆ ಹಾಗೂ 2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ, ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ನೋಡುವ ಸಂಕಲ್ಪ ಹೊಂದಿದ್ದೇವೆ ಎಂದು ಹೇಳಿದರು. ತಾವು ಮುಖ್ಯಮಂತ್ರಿಯಾಗಿದ್ದರೂ ಕಾರ್ಯಕರ್ತನಾಗಿ ಪಕ್ಷದೊಂದಿಗೆ ಕೆಲಸ ಮುಂದುವರಿಸುವುದಾಗಿ ತಿಳಿಸಿದರು.

ಇದೇ ವರ್ಷದಿಂದ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ತೀರ್ಮಾನಿಸಲಿದೆ ಎಂದು ಹೇಳಿದ ಅವರು, ಯುವ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲಿ ಚುನಾವಣೆ ಜಾರಿಗೆ ತರಲಾಗುವುದು ಎಂದರು.
ಕಳೆದ ಆರು ವರ್ಷಗಳ ಕೆಪಿಸಿಸಿ ಅಧ್ಯಕ್ಷರ ಅವಧಿಯನ್ನು ಸ್ಮರಿಸಿದ ಶಿವಕುಮಾರ್, ಕೋವಿಡ್ ಸಂಕಷ್ಟ, ರೈತ ಹೋರಾಟ, ಮೇಕೆದಾಟು ಪಾದಯಾತ್ರೆ, ಭಾರತ ಜೋಡೋ ಯಾತ್ರೆ ಹಾಗೂ ಗ್ಯಾರಂಟಿ ಯೋಜನೆಗಳ ಜಾರಿಗೆ ಪಕ್ಷ ಮತ್ತು ಕಾರ್ಯಕರ್ತರ ಕೊಡುಗೆಯನ್ನು ಕೊಂಡಾಡಿದರು.
ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಮತದಾನದ ಹಕ್ಕು ರಕ್ಷಿಸಲು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ವೇಳೆ ತಮ್ಮ ಪರ ಘೋಷಣೆ ಕೂಗಿದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಶಿವಕುಮಾರ್, “ವ್ಯಕ್ತಿ ಪೂಜೆ ಬೇಡ, ಪಕ್ಷ ಪೂಜೆ ಮಾಡಿ” ಎಂದು ಸೂಚಿಸಿದರು.