‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ
ನವದೆಹಲಿ: ಮೇಕೆದಾಟು ಯೋಜನೆ ಜಾರಿಗೊಳಿಸಲು ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಮಾಹಿತಿ ನೀಡಿದ್ದಾರೆ.
2018ರ ಕಾವೇರಿ ನೀರು ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ಯೋಜನೆ ಕೈಗೊಳ್ಳಲು ಕರ್ನಾಟಕವು ಕೆಳಹರಿವಿನ ರಾಜ್ಯಗಳ ಅನುಮತಿ ಪಡೆಯಬೇಕು ಎಂಬ ಉಲ್ಲೇಖ ಇಲ್ಲ ಎಂದು ಸಚಿವಾಲಯ ತಿಳಿಸಿದೆ. 2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ ಆದೇಶದ ಪ್ರಕಾರ, ನ್ಯಾಯಾಧಿಕರಣದ ತೀರ್ಪಿಗೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದೊಳಗಿನ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿಯಂತ್ರಿಸುವ ಹಕ್ಕು ಸಂಬಂಧಿತ ರಾಜ್ಯಗಳಿಗೆ ಇದೆ ಎಂದು ಸ್ಪಷ್ಟಪಡಿಸಲಾಗಿದೆ.

ಇದೇ ವೇಳೆ, ಕರ್ನಾಟಕ ಸರ್ಕಾರವು 2019ರಲ್ಲಿ ಸಲ್ಲಿಸಿದ್ದ ಮೇಕೆದಾಟು ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್)ಯನ್ನು ಕೇಂದ್ರ ಜಲ ಆಯೋಗ ಹಿಂತಿರುಗಿಸಿದ್ದು, ನ್ಯಾಯಾಧಿಕರಣದ ಆದೇಶ ಹಾಗೂ ಪ್ರಸ್ತುತ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಷ್ಕೃತ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಈ ಬೆಳವಣಿಗೆಯ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ಮತ್ತು ಜಲಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮೇಕೆದಾಟು, ಮಹದಾಯಿ ಯೋಜನೆಗಳು, ಜಲಾಶಯಗಳ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಡಾ. ಟಿ.ಬಿ. ಜಯಚಂದ್ರ, ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.