ಒಡಿಶಾ ಪ್ರವಾಹ: 6 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ
ಭುವನೇಶ್ವರ: ಒಡಿಶಾದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, 18 ಜಿಲ್ಲೆಗಳ ಸುಮಾರು 6 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಲಾವೃತ, ರಸ್ತೆ ಸಂಪರ್ಕ ಕಡಿತ, ಬೆಳೆ ಹಾನಿ ಹಾಗೂ ವಿದ್ಯುತ್ ವ್ಯತ್ಯಯದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ, 95 ಬ್ಲಾಕ್ಗಳು, 472 ಗ್ರಾಮ ಪಂಚಾಯಿತಿಗಳು, 1,301 ಗ್ರಾಮಗಳು ಹಾಗೂ 14 ನಗರ ಸ್ಥಳೀಯ ಸಂಸ್ಥೆಗಳು ಪ್ರವಾಹದಿಂದ ಬಾಧಿತವಾಗಿವೆ. ಒಟ್ಟು 5,93,083 ಜನರು ಪ್ರವಾಹದ ಪರಿಣಾಮ ಎದುರಿಸುತ್ತಿದ್ದು, 1,76,518 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ, ರಾಜ್ಯದಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಆಗಸ್ಟ್ 1ರವರೆಗೆ ಭಾರೀ ಮಳೆಯ ಮುನ್ಸೂಚನೆ ಇಲ್ಲದ ಕಾರಣ ಪ್ರವಾಹ ಪರಿಸ್ಥಿತಿ ಕ್ರಮೇಣ ಸುಧಾರಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಮಹಾನದಿ ನದಿಯಲ್ಲಿ ಮಧ್ಯಮ ಪ್ರಮಾಣದ ಪ್ರವಾಹ ಉಂಟಾಗುವ ಸಾಧ್ಯತೆಯಿದ್ದು, ಮುಂಡಲಿ ಬ್ಯಾರೇಜ್ನಲ್ಲಿ ಸುಮಾರು 9 ಲಕ್ಷ ಕ್ಯೂಸೆಕ್ ನೀರಿನ ಹರಿವನ್ನು ನಿರೀಕ್ಷಿಸಲಾಗಿದೆ. ಕಟಕ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
ಛತ್ತೀಸ್ಗಢದ ಮೇಲ್ಭಾಗದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಮಹಾನದಿ ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟ ಇಳಿಕೆಯಾಗುವ ನಿರೀಕ್ಷೆಯಿದೆ. ಪರಿಸ್ಥಿತಿಯ ಅವಲೋಕನಕ್ಕಾಗಿ ಸಚಿವ ಸುರೇಶ್ ಪೂಜಾರಿ ಅವರು ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.