ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ; ತಮಿಳುನಾಡು–ಕರ್ನಾಟಕದಲ್ಲಿ ಹೈ ಅಲರ್ಟ್
ನವದೆಹಲಿ: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕುಗೊಂಡಿದ್ದು, ತಮಿಳುನಾಡು ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಎರಡೂ ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.
ತಮಿಳುನಾಡಿನಲ್ಲಿ ಕರ್ನಾಟಕ–ಆಂಧ್ರ ಕರಾವಳಿ ಭಾಗದಲ್ಲಿರುವ ಕಡಿಮೆ ಒತ್ತಡದ ಪ್ರದೇಶದ ಪರಿಣಾಮ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ನೀಲಗಿರಿ, ತಿರುಪ್ಪೂರು, ದಿಂಡಿಗಲ್, ಥೇಣಿ, ಕನ್ಯಾಕುಮಾರಿ, ಈರೋಡ್ ಮತ್ತು ಸೇಲಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಯಮತ್ತೂರು, ತೆಂಕಸಿ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಚೆನ್ನೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 39ರಿಂದ 40 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗುವ ನಿರೀಕ್ಷೆಯಿದೆ.
ಇತ್ತ ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ತೀವ್ರಗೊಂಡಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಜೂನ್ 9ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಾಗೂ ಜೂನ್ 10ರಂದು ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ವಿಶೇಷ ಕಟ್ಟೆಚ್ಚರ ವಹಿಸಲಾಗಿದ್ದು, ಅಗತ್ಯವಿರುವ ಕಡೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳನ್ನು ಸಜ್ಜುಗೊಳಿಸಲಾಗಿದೆ.