ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ
ನವದೆಹಲಿ: ಬಲಿಷ್ಠ, ಸಮೃದ್ಧ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯದ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಶಿಕ್ಷಣ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಪ್ರಮುಖ ವಿದ್ಯಾರ್ಥಿವೇತನ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತ ಪ್ರತಿಭಾವಂತ ಯುವಜನರಿಂದ ಸಮೃದ್ಧವಾಗಿದ್ದು, ಸೂಕ್ತ ಅವಕಾಶ, ಮಾರ್ಗದರ್ಶನ ಹಾಗೂ ಬೆಂಬಲ ದೊರೆತರೆ ಹಳ್ಳಿಗಳು, ದೂರದ ಪ್ರದೇಶಗಳು ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳು ಕೂಡ ಗಮನಾರ್ಹ ಸಾಧನೆ ಮಾಡಬಹುದು ಎಂದು ಹೇಳಿದರು.
ವಿದ್ಯಾರ್ಥಿವೇತನ ಯೋಜನೆಗಳು ಕೇವಲ ಆರ್ಥಿಕ ನೆರವಿಗೆ ಸೀಮಿತವಾಗಿಲ್ಲ. ಅವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪನ್ಮೂಲಗಳ ಕೊರತೆಯನ್ನು ಮೀರಿ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ನೆರವಾಗುವ ಮಹತ್ವದ ವೇದಿಕೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

“ಶಿಕ್ಷಣವು ವ್ಯಕ್ತಿಯನ್ನು ಸ್ವಾವಲಂಬಿ, ಜಾಗೃತ ಹಾಗೂ ಸಮರ್ಥನನ್ನಾಗಿ ರೂಪಿಸುವ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ನನ್ನ ಜೀವನ ಪಯಣದಲ್ಲಿಯೂ ಶಿಕ್ಷಣ ಪ್ರಮುಖ ಪಾತ್ರ ವಹಿಸಿದೆ” ಎಂದು ದ್ರೌಪದಿ ಮುರ್ಮು ಹೇಳಿದರು.
ವಿದ್ಯಾರ್ಥಿವೇತನ ಫಲಾನುಭವಿಗಳು ತಮ್ಮ ಸಾಧನೆಗಳ ಮೂಲಕ ಹಿಂದುಳಿದ ಹಿನ್ನೆಲೆಯ ಮಕ್ಕಳಿಗೆ ಪ್ರೇರಣೆಯಾಗಬೇಕು ಎಂದು ಕರೆ ನೀಡಿದ ಅವರು, ಸಮಾಜದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಯಶಸ್ಸಿನ ನಿಜವಾದ ಅರ್ಥ ಇತರರಿಗೂ ಮುನ್ನಡೆಯಲು ನೆರವಾಗುವಲ್ಲಿ ಅಡಗಿದೆ ಎಂದು ತಿಳಿಸಿದರು.
ಭಾರತದ ಅಭಿವೃದ್ಧಿ ಪಥದಲ್ಲಿ ಯುವಜನರೇ ದೇಶದ ಶಕ್ತಿ, ಭರವಸೆ ಮತ್ತು ಭವಿಷ್ಯವಾಗಿದ್ದಾರೆ ಎಂದು ಹೇಳಿದ ರಾಷ್ಟ್ರಪತಿಗಳು, ಬುಡಕಟ್ಟು ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದಲ್ಲಿ ಮುನ್ನಡೆಯುವಾಗ ತಮ್ಮ ಸಮುದಾಯ ಹಾಗೂ ಸಾಂಸ್ಕೃತಿಕ ಬೇರುಗಳೊಂದಿಗೆ ನಂಟು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಕಾರಗೊಳಿಸಲು ಯುವಕರ ಸಕ್ರಿಯ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದು ಅವರು ಹೇಳಿದರು. ವಿವಿಧ ಕ್ಷೇತ್ರಗಳಲ್ಲಿ ಬುಡಕಟ್ಟು ಯುವಕರು ದೇಶದ ಪ್ರಗತಿಗೆ ಮಹತ್ವದ ಕೊಡುಗೆ ನೀಡಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.