2-3 ದಿನ ರಾಜ್ಯದಲ್ಲಿ ವರುಣಾರ್ಭಟ ಸಾಧ್ಯತೆ; ಬೆಂಗಳೂರಿನಲ್ಲೂ ಮಳೆ ಸಂಭವ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಮುಂದಿನ ಎರಡು ರಿಂದ ಮೂರು ದಿನಗಳ ಕಾಲ ವರುಣನ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಚಟುವಟಿಕೆ ತೀವ್ರಗೊಳ್ಳಲಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹಲವೆಡೆ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಮಳೆ ಮತ್ತಷ್ಟು ಬಿರುಸು ಪಡೆಯುತ್ತಿರುವ ಹಿನ್ನೆಲೆ ತಗ್ಗು ಪ್ರದೇಶದ ನಿವಾಸಿಗಳು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ.