ಜೈಪುರ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಬೆಂಕಿ; ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ
ಜೈಪುರ: ರಾಜಸ್ಥಾನದ ಜೈಪುರದ ಖೋ ನಾಗೋರಿಯನ್ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಘಟಕದಲ್ಲಿ ಹೆಚ್ಚಿನ ಪ್ರಮಾಣದ ಗನ್ಪೌಡರ್ ಮತ್ತು ಸಿದ್ಧಪಡಿಸಿದ ಪಟಾಕಿಗಳು ಇದ್ದ ಕಾರಣ ಬೆಂಕಿ ಸ್ಫೋಟಗಳೊಂದಿಗೆ ವೇಗವಾಗಿ ಹರಡಿದ್ದು, ರಕ್ಷಣಾ ಕಾರ್ಯಾಚರಣೆ ಸವಾಲಿನದಾಯಿತು.
ಘಟನೆ ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿದವು. ಬೆಂಕಿಯಿಂದ ಕಟ್ಟಡದೊಳಗೆ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರು ಗೋಡೆಯ ಭಾಗಗಳನ್ನು ಒಡೆದು ದಾರಿ ಮಾಡಿಕೊಟ್ಟರು.
ಮೃತರಲ್ಲಿ ಮೊಹಮ್ಮದ್ ಅಶ್ರಫ್ (40), ಮೊಹಮ್ಮದ್ ರಬ್ಬಿಲ್ (16), ಅಬ್ದುಲ್ ವಾಹಿದ್ (46), ಸಮೀರ್ ಖಾನ್ (20), ಬಿಲಾಲ್ (28), ಆಜಿಮ್ (18) ಮತ್ತು ನಾಸಿರ್ ಖಾನ್ (25) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ಅಥವಾ ಗನ್ಪೌಡರ್ ಸಂಗ್ರಹಣೆಯಲ್ಲಿನ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸಲು ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.