ಎಸ್ಐಆರ್ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕರ್ನಾಟಕದಲ್ಲಿ ಶೇ.20ರಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5.40 ಕೋಟಿ ಮತದಾರರಲ್ಲಿ 20 ಪ್ರತಿಶತದಷ್ಟು ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಮತದಾರರನ್ನು ಗುರಿಯಾಗಿಸಿಕೊಂಡು ಈ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಗೈರು, ಮೃತಪಟ್ಟವರು, ವಿಳಾಸ ಬದಲಾವಣೆ ಹಾಗೂ ನಕಲಿ ದಾಖಲೆಗಳ ಹೆಸರಿನಲ್ಲಿ ಅರ್ಹ ಮತದಾರರ ಹೆಸರನ್ನೂ ಕೈಬಿಡಲಾಗುತ್ತಿದೆ. ಹಲವು ಕಡೆ ಮನೆ-ಮನೆಗೆ ತೆರಳಿ ಗಣತಿ ನಮೂನೆ ವಿತರಿಸದೇ ಮತದಾರರನ್ನು ಗೈರು ಎಂದು ಗುರುತಿಸಲಾಗಿದೆ ಎಂದು ದೂರಿದರು.

ಅರ್ಹ ಮತದಾರರ ಮತದಾನದ ಹಕ್ಕು ರಕ್ಷಿಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ. ಆದರೆ ರಾಜ್ಯ ಚುನಾವಣಾ ಆಯೋಗವು ಕಾಂಗ್ರೆಸ್ ನೀಡಿರುವ ಹಲವು ಮನವಿಗಳಿಗೆ ಸಮರ್ಪಕ ಉತ್ತರ ನೀಡಿಲ್ಲ. ಎಲ್ಲಾ ಮತಗಟ್ಟೆಗಳಲ್ಲಿ ಸಹಾಯ ಕೇಂದ್ರ ತೆರೆಯುವುದಾಗಿ ಹೇಳಿದ್ದರೂ ಅದನ್ನು ಅನುಷ್ಠಾನಗೊಳಿಸಿಲ್ಲ ಎಂದು ಟೀಕಿಸಿದರು.
ಎಸ್ಐಆರ್ ಫಾರ್ಮ್ ಸಲ್ಲಿಕೆಗೆ ನೀಡಿರುವ ಅವಧಿಯನ್ನು ಕನಿಷ್ಠ ಒಂದು ತಿಂಗಳು ವಿಸ್ತರಿಸಬೇಕು. ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದನ್ನು ತಕ್ಷಣವೇ ತಡೆಯಬೇಕು. ಅಗತ್ಯವಿದ್ದರೆ ಈ ವಿಚಾರವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ರಮೇಶ್ ಬಾಬು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪದವೀಧರರ ವಿಭಾಗದ ಅಧ್ಯಕ್ಷ ನಟರಾಜ ಗೌಡ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಉಪಸ್ಥಿತರಿದ್ದರು.