ಎಥೆನಾಲ್ ನೀತಿಗೆ ಪ್ರಿಯಾಂಕ್ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’
ಬೆಂಗಳೂರು: ತೆರಿಗೆದಾರರ ಹಣದಲ್ಲಿ ರೈತರಿಂದ ಭತ್ತ ಖರೀದಿಸಿ, ಸಂಗ್ರಹಣೆ ಹಾಗೂ ಸಾಗಣೆ ವೆಚ್ಚವನ್ನೂ ಸರ್ಕಾರವೇ ಭರಿಸಿದ ಬಳಿಕ, ಅದೇ ಅಕ್ಕಿಯನ್ನು ಎಥೆನಾಲ್ ಉತ್ಪಾದಕರಿಗೆ ಸ್ವಾಧೀನ ವೆಚ್ಚಕ್ಕಿಂತ ಸುಮಾರು ಶೇ.40ರಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಭಾರತದ ಎಥೆನಾಲ್ ಗಣಿತವೇ ಸರಿಯಾಗಿ ಹೊಂದಿಕೆಯಾಗುತ್ತಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.
ಆಹಾರ ಭದ್ರತೆಗಾಗಿ ರೈತರಿಂದ ಭತ್ತ ಖರೀದಿಸಲು ತೆರಿಗೆದಾರರ ಹಣ ಬಳಸಲಾಗುತ್ತದೆ. ಬಳಿಕ ಭಾರತೀಯ ಆಹಾರ ನಿಗಮ (FCI) ಮೂಲಕ ಧಾನ್ಯವನ್ನು ಸಂಗ್ರಹಿಸಿ, ಸಾಗಣೆ ಮಾಡುವ ವೆಚ್ಚವನ್ನೂ ಸರ್ಕಾರವೇ ಭರಿಸುತ್ತದೆ. ಇಷ್ಟೆಲ್ಲ ಖರ್ಚು ಮಾಡಿದ ನಂತರ ಅಕ್ಕಿಯನ್ನು ಎಥೆನಾಲ್ ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದು ಯಾವ ರೀತಿಯ ಆರ್ಥಿಕ ನೀತಿ ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ತುರ್ತಾಗಿ ಸೃಷ್ಟಿಸಲಾದ ಎಥೆನಾಲ್ ಉತ್ಪಾದನಾ ಸಾಮರ್ಥ್ಯಕ್ಕೆ ಕಚ್ಚಾ ವಸ್ತು ಒದಗಿಸುವ ಉದ್ದೇಶದಿಂದ ಆಹಾರ ಧಾನ್ಯವನ್ನು ದೊಡ್ಡ ಪ್ರಮಾಣದಲ್ಲಿ ಎಥೆನಾಲ್ ಉತ್ಪಾದನೆಗೆ ತಿರುಗಿಸಲಾಗುತ್ತಿದೆಯೇ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ಸರ್ಕಾರವೇ ಎಥೆನಾಲ್ ಉತ್ಪಾದಕರಿಂದ ಹೆಚ್ಚಿನ ಬೆಲೆಗೆ ಎಥೆನಾಲ್ ಖರೀದಿಸಿ ಪೆಟ್ರೋಲ್ನಲ್ಲಿ ಮಿಶ್ರಣ ಮಾಡುತ್ತಿದೆ. “ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ, ಬಳಿಕ ಅದೇ ಉದ್ಯಮದಿಂದ ಹೆಚ್ಚಿನ ಬೆಲೆಗೆ ಎಥೆನಾಲ್ ಖರೀದಿಸುವುದರಿಂದ ಸಾಮಾನ್ಯ ಗ್ರಾಹಕರಿಗೆ ನಿಜವಾದ ಲಾಭವೇನು?” ಎಂದು ಅವರು ಪ್ರಶ್ನಿಸಿದ್ದಾರೆ.
ಎಥೆನಾಲ್ ಮಿಶ್ರಣದಿಂದ ಪೆಟ್ರೋಲ್ ಬೆಲೆ ಕಡಿಮೆಯಾಗಿದೆಯೇ, ವಾಹನಗಳ ಮೈಲೇಜ್ ಹಾಗೂ ನಿರ್ವಹಣಾ ವೆಚ್ಚದ ಮೇಲೆ ಅದರ ಪರಿಣಾಮವೇನು ಎಂಬುದನ್ನೂ ಕೇಂದ್ರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
This is bizarre and deeply concerning.
The government buys paddy with taxpayer money for food security, incurs procurement, storage and transport costs and then sells FCI rice to ethanol distillers at roughly 40% below its acquisition cost.
Why? Because the ethanol capacity…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 25, 2026
“ತೆರಿಗೆದಾರರ ಹಣದಲ್ಲಿ ಧಾನ್ಯಕ್ಕೆ ಸಬ್ಸಿಡಿ, ಖರೀದಿ-ಸಂಗ್ರಹಣೆ-ಸಾಗಣೆಗೆ ವೆಚ್ಚ, ಬಳಿಕ ರಿಯಾಯಿತಿ ದರದಲ್ಲಿ ಎಥೆನಾಲ್ ಉತ್ಪಾದಕರಿಗೆ ಮಾರಾಟ. ನಂತರ ಅದೇ ಉದ್ಯಮದಿಂದ ಹೆಚ್ಚಿನ ಬೆಲೆಗೆ ಎಥೆನಾಲ್ ಖರೀದಿ. ಹಾಗಾದರೆ ಯಾರಿಗೆ ಸಬ್ಸಿಡಿ ನೀಡಲಾಗುತ್ತಿದೆ ಮತ್ತು ನಿಜವಾಗಿ ಲಾಭ ಪಡೆಯುತ್ತಿರುವವರು ಯಾರು?” ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ಆಹಾರ ಭದ್ರತೆಗೆ ಮೀಸಲಾದ ಧಾನ್ಯವನ್ನು ಎಥೆನಾಲ್ ಉತ್ಪಾದನೆಗೆ ಬಳಸುವ ನೀತಿಯ ಆರ್ಥಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಪಾರದರ್ಶಕ ಲೆಕ್ಕ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.