ಹನೂರಿನಲ್ಲಿ ಗಣೇಶೋತ್ಸವ ತಯಾರಿ: ನಿಯಮ ಉಲ್ಲಂಘಿಸಿದರೆ ಆಯೋಜಕರೇ ಹೊಣೆ
ವರದಿ: ಮಹದೇವ ಸ್ವಾಮಿ ಜಿ. ಗೌಡ
ಚಾಮರಾಜನಗರ : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಗಣೇಶೋತ್ಸವ ಸಮಿತಿ ಮುಖಂಡರು ಹಾಗೂ ಯುವಕರ ಸಮ್ಮುಖದಲ್ಲಿ ಪಟ್ಟಣದ ಕಮ್ಮವಾರಿ ಭವನದಲ್ಲಿ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಹನೂರು ಠಾಣೆ ಇನ್ಸ್ಪೆಕ್ಟರ್ ಆನಂದಮೂರ್ತಿ, ಗಣೇಶೋತ್ಸವವನ್ನು ಕೇವಲ ಮೋಜು-ಮಸ್ತಿಗೆ ಸೀಮಿತಗೊಳಿಸದೆ ಶ್ರದ್ಧೆ ಮತ್ತು ಸಂಪ್ರದಾಯದೊಂದಿಗೆ ಆಚರಿಸಬೇಕು ಎಂದು ಸಲಹೆ ನೀಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ರಸ್ತೆ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಸೇವಕರನ್ನು ನಿಯೋಜಿಸಬೇಕು. ಸಂಜೆ 6 ಗಂಟೆಯೊಳಗೆ ಗಣೇಶ ಮೂರ್ತಿ ವಿಸರ್ಜನೆ ಪೂರ್ಣಗೊಳಿಸಬೇಕು. ಡಿಜೆ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಬದಲಾಗಿ ಡೋಲು, ತಮಟೆ ಸೇರಿದಂತೆ ಸಾಂಪ್ರದಾಯಿಕ ವಾದ್ಯಗಳನ್ನು ಬಳಸಬೇಕು ಎಂದು ತಿಳಿಸಿದರು.
ಗ್ರಾಮ ಮಟ್ಟದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಗ್ರಾಮ ಪಂಚಾಯಿತಿ ಪಿಡಿಒಗೆ ಮಾಹಿತಿ ನೀಡಬೇಕು. ಸಾರ್ವಜನಿಕರಿಂದ ಬಲವಂತವಾಗಿ ಹಣ ವಸೂಲಿ ಮಾಡಬಾರದು. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಮಣ್ಣಿನ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು ಎಂದರು.

ಈ ನಿಯಮಗಳ ಉಲ್ಲಂಘನೆಯಾದಲ್ಲಿ ಆಯೋಜಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇನ್ಸ್ಪೆಕ್ಟರ್ ಎಚ್ಚರಿಕೆ ನೀಡಿದರು.
ಅನುಮತಿ ಪಡೆದೇ ಗಣೇಶ ಕೂರಿಸಬೇಡಿ
ತಹಶೀಲ್ದಾರ್ ಚೈತ್ರಾ ಮಾತನಾಡಿ, ಗಣೇಶೋತ್ಸವವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಬೇಕು. ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಾರದು. ಎಲ್ಲರೂ ಮಣ್ಣಿನ ಗಣಪತಿ ಮೂರ್ತಿಗಳನ್ನು ಬಳಸಿ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದರು.
ವಿಸರ್ಜನೆಗೆ ಪ್ರತ್ಯೇಕ ಹೊಂಡ
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ ಮಾತನಾಡಿ, ಗಣೇಶ ಪ್ರತಿಷ್ಠಾಪನೆಯ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಅನುಮತಿ ಪಡೆದ ಸ್ಥಳದಲ್ಲಿಯೇ ಮೂರ್ತಿ ಪ್ರತಿಷ್ಠಾಪಿಸಬೇಕು. ಪಟ್ಟಣ ಪಂಚಾಯಿತಿ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಹೊಂಡ ನಿರ್ಮಿಸಲಾಗುತ್ತಿದ್ದು, ಎಲ್ಲರೂ ಅದೇ ಹೊಂಡದಲ್ಲಿ ವಿಸರ್ಜನೆ ಮಾಡಬೇಕು ಎಂದು ತಿಳಿಸಿದರು.
ಪ್ರಸಾದ ವಿತರಣೆಯಲ್ಲಿ ಪ್ಲಾಸ್ಟಿಕ್ ಬಳಕೆ ತಪ್ಪಿಸಿ ಪರಿಸರ ಸ್ನೇಹಿ ತಟ್ಟೆಗಳನ್ನು ಬಳಸಬೇಕು. ಅನುಮತಿ ಪಡೆದ ಪ್ರತಿಷ್ಠಾಪನಾ ಸ್ಥಳಗಳ ಮಾಹಿತಿ ನೀಡಿದರೆ ಪಂಚಾಯಿತಿ ವತಿಯಿಂದ ಸ್ವಚ್ಛತಾ ವ್ಯವಸ್ಥೆ ಮಾಡಲಾಗುವುದು ಎಂದರು.
ಅಗ್ನಿಶಾಮಕ ಠಾಣೆ ಇನ್ಸ್ಪೆಕ್ಟರ್ ರವೀಂದ್ರ ಮಾತನಾಡಿ, ವಿಸರ್ಜನೆ ವೇಳೆ ಯುವಕರು ಅಡ್ಡಾದಿಡ್ಡಿಯಾಗಿ ನೀರಿಗೆ ಇಳಿಯಬಾರದು. ಈಜು ಬಾರದವರು ನೀರಿಗೆ ಇಳಿದು ಅವಘಡ ಸಂಭವಿಸಿದರೆ ಆಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಗಣೇಶೋತ್ಸವ ಸಮಿತಿ ಮುಖಂಡರು ಹಾಗೂ ಯುವಕರು ಭಾಗವಹಿಸಿದ್ದರು.