ಮಲೆನಾಡಲ್ಲಿ ಪ್ರತ್ಯೇಕ ದುರಂತ: ನಾಲ್ವರು ಸಾವು
ಚಿಕ್ಕಮಗಳೂರು/ಶಿವಮೊಗ್ಗ: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆದ ಮೂರು ಪ್ರತ್ಯೇಕ ದುರ್ಘಟನೆಗಳಲ್ಲಿ ಇಬ್ಬರು ಬೈಕ್ ಸವಾರರು, ಪಾದಚಾರಿ ಹಾಗೂ ವಿದ್ಯಾರ್ಥಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಸಖರಾಯಪಟ್ಟಣ ಸಮೀಪದ ಹಳೇಹಟ್ಟಿ ಬಳಿ ಬೈಕ್ ಸವಾರರ ಮೇಲೆ ಸರ್ಕಾರಿ ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ. ಟೈಲ್ಸ್ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಕಲ್ಲು ಹಾಗೂ ನೆಹಾನ ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಮುಂದೆ ಸಾಗುತ್ತಿದ್ದ ಮತ್ತೊಂದು ಬೈಕ್ ಏಕಾಏಕಿ ಬಲಕ್ಕೆ ತಿರುವು ಪಡೆದಿದೆ ಎನ್ನಲಾಗಿದೆ. ಇದರಿಂದ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದು, ಇದೇ ವೇಳೆ ಬಂದ ಸರ್ಕಾರಿ ಬಸ್ ಅವರ ಮೇಲೆ ಹರಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಪ್ರಕರಣ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಶಿವಮೊಗ್ಗ ಸಮೀಪ ಸವಳಂಗ ರಸ್ತೆಯ ಕೃಷಿ ಕಾಲೇಜು ಸಮೀಪ ಖಾಸಗಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಆನಂದ್ ಮೃತಪಟ್ಟಿದ್ದಾರೆ. ಗಂಗೂರು ನಿವಾಸಿಯಾಗಿದ್ದ ಅವರು ‘ತುಂಗತರಂಗ’ ದಿನಪತ್ರಿಕೆ ಸಿಬ್ಬಂದಿಗಳಾದ ರಾಕೇಶ್ ಹಾಗೂ ರವಿ ಅವರ ತಂದೆ ಎಂದು ತಿಳಿದುಬಂದಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನೊಂದು ಘಟನೆಯಲ್ಲಿ, ಶಿವಮೊಗ್ಗದ ಸೋಮಿನಕೊಪ್ಪ ಕೆರೆಯಲ್ಲಿ ಈಜಲು ತೆರಳಿದ್ದ 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಬುರಾನ್ (16) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬೆಳಗ್ಗೆ ಕೆರೆಗೆ ತೆರಳಿದ್ದ ಬಾಲಕ ನಾಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನೆ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.