ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ
ಪುಣೆ: ಮಾಜಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ದುರಂತ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿಲ್ಲ ಎಂದು ಎನ್ಸಿಪಿ (ಎಸ್ಪಿ) ನಾಯಕಿ ಸುಪ್ರಿಯಾ ಸುಳೆ ಆರೋಪಿಸಿದ ಬೆನ್ನಲ್ಲೇ, ಅಜಿತ್ ಪವಾರ್ ಅವರ ಪತ್ನಿ ಹಾಗೂ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಭಾವುಕ ಪ್ರತಿಕ್ರಿಯೆ ನೀಡಿದ್ದಾರೆ.

“ಅಜಿತ್ ದಾದಾ ಅವರ ಅಗಲಿಕೆಯ ನೋವು ಅವರ ತಾಯಿ, ಮಕ್ಕಳು ಮತ್ತು ನನಗಿಂತ ಹೆಚ್ಚು ಯಾರಿಗೂ ಇರಲು ಸಾಧ್ಯವಿಲ್ಲ. ಈ ಸೂಕ್ಷ್ಮ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು” ಎಂದು ಸುನೇತ್ರಾ ಮನವಿ ಮಾಡಿದ್ದಾರೆ.
ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ದುರಂತದ ಕುರಿತು ಕುಟುಂಬವು ಶೀಘ್ರದಲ್ಲೇ ಸ್ಪಷ್ಟ ತೀರ್ಮಾನವನ್ನು ನಿರೀಕ್ಷಿಸುತ್ತಿದೆ ಎಂದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈಗಾಗಲೇ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ವಿಧಾನಸಭೆಯಲ್ಲಿ ನೀಡಿದ ಭರವಸೆಯಂತೆ ತನಿಖೆ ಮುಂದುವರಿಯುತ್ತಿದೆ. ತನಿಖಾ ಸಂಸ್ಥೆಗಳು ತಮ್ಮ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಗತ್ಯ ಸಮಯ ನೀಡಬೇಕು ಎಂದು ಸುನೇತ್ರಾ ಹೇಳಿದರು. ಸಂವಿಧಾನ ಮತ್ತು ಕಾನೂನಿನ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಎಂದರು.
ಇದಕ್ಕೂ ಮುನ್ನ ಸುಪ್ರಿಯಾ ಸುಳೆ, ಅಜಿತ್ ಪವಾರ್ ಸಾವಿಗೆ ಕಾರಣವಾದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ಐಆರ್ ದಾಖಲಾಗದಿರುವುದನ್ನು ಪ್ರಶ್ನಿಸಿದ್ದರು. ಅಜಿತ್ ಪವಾರ್ ಅವರ ಬಣದ ಶಾಸಕರು ಹಾಗೂ ಸಚಿವರು ನ್ಯಾಯಕ್ಕಾಗಿ ಒತ್ತಾಯಿಸುವ ಬದಲು ಅಧಿಕಾರ ಅನುಭವಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.
ಅಜಿತ್ ಪವಾರ್ ಅವರು ಜನವರಿ 28ರಂದು ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ Learjet 45 (VT-SSK) ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು.