Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ; ಸಚಿವ ಕೃಷ್ಣ ಬೈರೇಗೌಡರ ಕ್ರಮಕ್ಕೆ ಶ್ಲಾಘನೆ

By ANU News
July 11, 2026 2 Min Read
0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೈಗೊಂಡಿರುವ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ನಗರದ ಪ್ರಮುಖ ರಸ್ತೆಗಳಲ್ಲಿ ಪಾದಚಾರಿಗಳಿಗಾಗಿ ಮೀಸಲಾದ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಟ್ಟಡಗಳು, ಶಾಶ್ವತ ಹಾಗೂ ತಾತ್ಕಾಲಿಕ ಅಂಗಡಿಗಳು ಮತ್ತು ಅನಧಿಕೃತ ವ್ಯಾಪಾರ ಚಟುವಟಿಕೆಗಳನ್ನು ತೆರವುಗೊಳಿಸುವುದು ಸರಿಯಾದ ಕ್ರಮ ಎಂದು ಹೇಳಿದ್ದಾರೆ.

ಈ ಕಾರ್ಯಾಚರಣೆ ಯಾವುದೇ ವ್ಯಕ್ತಿ ಅಥವಾ ವ್ಯಾಪಾರಿಗಳ ವಿರುದ್ಧದ್ದಲ್ಲ. ಕೋಟ್ಯಂತರ ನಾಗರಿಕರ ಸುರಕ್ಷತೆ, ಸುಗಮ ಸಂಚಾರ ಮತ್ತು ಉತ್ತಮ ಜೀವನಮಟ್ಟಕ್ಕಾಗಿ ಕೈಗೊಳ್ಳುತ್ತಿರುವ ಸಾರ್ವಜನಿಕ ಹಿತಾಸಕ್ತಿಯ ಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಜಾಲತಾಣ Xನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಕೆಲವರು ಮತ್ತು ಕೆಲವು ಸಂಘಟನೆಗಳು ಈ ಕಾರ್ಯಾಚರಣೆಯನ್ನು ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಟಿ.ಎ. ನಾರಾಯಣಗೌಡ ಹೇಳಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಮಾತ್ರ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಉಳಿದ ಪ್ರದೇಶಗಳಲ್ಲಿ ವ್ಯಾಪಾರ ನಡೆಸಲು ಅವಕಾಶವಿದೆ. ಹೀಗಾಗಿ ಪಾದಚಾರಿಗಳ ಹಕ್ಕುಗಳನ್ನು ರಕ್ಷಿಸುವ ಕ್ರಮವನ್ನು ವ್ಯಾಪಾರ ವಿರೋಧಿ ಎಂದು ಬಿಂಬಿಸುವುದು ತಪ್ಪು ಎಂದು ಅವರು ಹೇಳಿದ್ದಾರೆ.

ಬಡ ಮತ್ತು ಸಣ್ಣ ವ್ಯಾಪಾರಿಗಳ ಜೀವನೋಪಾಯದ ಬಗ್ಗೆ ಸರ್ಕಾರ ಮಾನವೀಯ ದೃಷ್ಟಿಕೋನ ಹೊಂದಬೇಕು. ಅಗತ್ಯವಿದ್ದರೆ ಪರ್ಯಾಯ ಸ್ಥಳಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬಹುದು. ಆದರೆ ಸಾರ್ವಜನಿಕರ ಓಡಾಟಕ್ಕೆ ಮೀಸಲಾದ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸುವುದನ್ನು ವಿರೋಧಿಸುವುದು ಕಾನೂನುಬದ್ಧವಾಗಿಯೂ ನೈತಿಕವಾಗಿಯೂ ಸಮರ್ಥನೀಯವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಅನೇಕ ಕಡೆ ಪಾದಚಾರಿಗಳು ರಸ್ತೆ ಮೇಲೆಯೇ ನಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಸುರಕ್ಷಿತ ಪಾದಚಾರಿ ವ್ಯವಸ್ಥೆಯೂ ನಗರದ ಅಭಿವೃದ್ಧಿಯ ಪ್ರಮುಖ ಮಾನದಂಡವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೃಷ್ಣ ಬೈರೇಗೌಡ ಅವರು ಯಾವುದೇ ಒತ್ತಡ ಅಥವಾ ರಾಜಕೀಯ ಟೀಕೆಗಳಿಗೆ ಮಣಿಯದೆ ಈ ಕಾರ್ಯಾಚರಣೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿರುವ ಅವರು, ರಸ್ತೆ ಬದಿಯಲ್ಲಿ ವರ್ಷಗಳಿಂದ ನಿಂತಿರುವ ಬಳಕೆಯಲ್ಲದ ವಾಹನಗಳ ತೆರವು, ಕೆರೆಗಳು, ರಾಜಕಾಲುವೆಗಳು ಹಾಗೂ ಸರ್ಕಾರಿ ಜಮೀನುಗಳ ಮೇಲಿನ ಅತಿಕ್ರಮಣ ತೆರವುಗೂ ಸರ್ಕಾರ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ನಗರದ ಅಭಿವೃದ್ಧಿಗೆ ಸಾರ್ವಜನಿಕ ಹಿತಾಸಕ್ತಿಯ ಆಧಾರದ ಮೇಲೆ ಸರ್ಕಾರ ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸಚಿವ ಕೃಷ್ಣ ಬೈರೇಗೌಡ ಹಾಗೂ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತನ್ನ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಟಿ.ಎ. ನಾರಾಯಣಗೌಡ ಹೇಳಿದ್ದಾರೆ.

Author

ANU News

Follow Me
Other Articles
Previous

CM D.K. Shivakumar Joins Bengaluru Footpath Encroachment Drive, Reviews Progress

Next

Karnataka Rakshana Vedike Backs Bengaluru Footpath Clearance Drive, Praises Minister Krishna Byre Gowda

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ
    • Trump Says Ceasefire Over, But US-Iran Talks to Continue
    • ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್
    • A Woman’s Mysterious Story Unfolds; ‘Oh Sukumari!’ Trailer Released
    • ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ
    Copyright 2026 — ANU News. All rights reserved. Blogsy WordPress Theme