ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ
ಬೆಂಗಳೂರು: ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿಯಲ್ಲಿ ಸುಮಾರು ₹800 ಕೋಟಿ ಮೊತ್ತದ ಡೀಲ್ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳು ಹುದ್ದೆ ಪಡೆಯಲು ವಿಫಲವಾಗಿದ್ದು, ಹಣ ನೀಡಿ ಅಕ್ರಮವಾಗಿ ಹುದ್ದೆ ಪಡೆದಿರುವ ಆರೋಪಗಳಿವೆ ಎಂದು ಹೇಳಿದರು.

ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳು ಕೆಪಿಎಸ್ಸಿ ಪರೀಕ್ಷೆಯಲ್ಲಿ 350ಕ್ಕೂ ಹೆಚ್ಚು ಅಂಕ ಗಳಿಸಲು ಸಾಧ್ಯವಾಗಿಲ್ಲ. ಆದರೆ ವಿಶ್ವವಿದ್ಯಾಲಯದಲ್ಲಿ ಸಾಧಾರಣ ಅಂಕ ಪಡೆದ ಕೆಲ ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆಯಲ್ಲಿ 400ಕ್ಕೂ ಹೆಚ್ಚು ಅಂಕ ಗಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಹುದ್ದೆಗಳ ಮಾರಾಟ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು.
ಈ ಪ್ರಕರಣದಲ್ಲಿ ಇಲಾಖಾ ಮಟ್ಟದ ತನಿಖೆ ನಡೆಸುವುದರಿಂದ ಪ್ರಯೋಜನವಿಲ್ಲ. ಸತ್ಯಾಂಶ ಹೊರಬರಬೇಕಾದರೆ ಸಿಬಿಐ ತನಿಖೆಯೊಂದೇ ಸೂಕ್ತ ಎಂದು ಅಶೋಕ್ ಒತ್ತಾಯಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಕೆಪಿಎಸ್ಸಿ ನೇಮಕಾತಿ ಅಕ್ರಮದ ಬಗ್ಗೆ ಏಕೆ ಮೌನ ವಹಿಸಿದ್ದಾರೆ ಎಂದು ಆರ್. ಅಶೋಕ್ ಪ್ರಶ್ನಿಸಿದರು.