ಕ್ಷೇತ್ರ ಪುನರ್ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಸಿಎಂ ಡಿಕೆಶಿ
ತಿರುವನಂತಪುರಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕೇರಳದ ಕೋವಲಂನಲ್ಲಿ ಗುರುವಾರ ನಡೆದ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ, ಮೇಕೆದಾಟು ಯೋಜನೆ ಹಾಗೂ ಕಾವೇರಿ ನೀರು ಹಂಚಿಕೆ ವಿಚಾರಗಳು ಪ್ರಮುಖವಾಗಿ ಚರ್ಚೆಗೆ ಬಂದವು.

ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿಯಾಗಿರುವ ದಕ್ಷಿಣ ರಾಜ್ಯಗಳಿಗೆ ಕ್ಷೇತ್ರ ಪುನರ್ವಿಂಗಡಣೆ ವೇಳೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿದರು. 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಕ್ಷೇತ್ರ ಪುನರ್ವಿಂಗಡಣೆ ನಡೆಸಬೇಕು. ಲೋಕಸಭೆಯ ಒಟ್ಟು 543 ಸ್ಥಾನಗಳನ್ನು ಮುಂದಿನ 25 ವರ್ಷಗಳ ಕಾಲ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನಸಂಖ್ಯೆ ನಿಯಂತ್ರಣಕ್ಕೆ ಕೇಂದ್ರ ನೀಡಿದ ಕರೆಯನ್ನು ದಕ್ಷಿಣ ರಾಜ್ಯಗಳು ಯಶಸ್ವಿಯಾಗಿ ಪಾಲಿಸಿವೆ. ಈ ಸಾಧನೆಗಾಗಿ ಕ್ಷೇತ್ರ ಪುನರ್ವಿಂಗಡಣೆ ಸಂದರ್ಭದಲ್ಲಿ ಅವುಗಳಿಗೆ ರಾಜಕೀಯವಾಗಿ ಶಿಕ್ಷೆಯಾಗಬಾರದು. ಪ್ರಾತಿನಿಧ್ಯವೆಂದರೆ ಕೇವಲ ಸ್ಥಾನಗಳ ಸಂಖ್ಯೆಯಲ್ಲ, ಅದು ರಾಜಕೀಯ ಪ್ರಭಾವ ಮತ್ತು ಜನರ ಧ್ವನಿಯೂ ಆಗಿದೆ ಎಂದು ಸಿಎಂ ಶಿವಕುಮಾರ್ ಹೇಳಿದ್ದಾರೆ
1971ರ ಜನಗಣತಿಯ ಆಧಾರವನ್ನು ಗೌರವಿಸುವ ಮೂಲಕ ದಕ್ಷಿಣ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯವನ್ನು ರಕ್ಷಿಸಬೇಕು. 543 ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮುಂದಿನ 25 ವರ್ಷಗಳ ಕಾಲ ಸ್ಥಗಿತಗೊಳಿಸುವಂತೆ ದಕ್ಷಿಣ ವಲಯ ಮಂಡಳಿ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಇದೇ ವೇಳೆ ಮೇಕೆದಾಟು ಯೋಜನೆ ಹಾಗೂ ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದವನ್ನೂ ಸಿಎಂ ಶಿವಕುಮಾರ್ ಪ್ರಸ್ತಾಪಿಸಿದರು. ಮೇಕೆದಾಟು ಜಲಾಶಯ ನಿರ್ಮಾಣದಿಂದ ತಮಿಳುನಾಡು ಮತ್ತು ಪುದುಚೇರಿಯ ರೈತರಿಗೂ ಪ್ರಯೋಜನವಾಗಲಿದೆ ಎಂದು ತಿಳಿಸಿದರು.
ಸಭೆಗೆ ಆಗಮಿಸುವ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾವೇರಿ ನೀರು ಹಂಚಿಕೆ ಸಮಸ್ಯೆ ಪರಿಹಾರವಾಗಬೇಕು ಎಂದು ಹೇಳಿದರು. ಮೇಕೆದಾಟು ಯೋಜನೆಯ ನೀರು ತಮಿಳುನಾಡು ಹಾಗೂ ಪುದುಚೇರಿಯ ರೈತರಿಗೂ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಡುವೆ ಕಾವೇರಿ ಮತ್ತು ಮೇಕೆದಾಟು ವಿಚಾರಗಳ ಕುರಿತು ಮಾತುಕತೆ ನಡೆಯಿತು. ಇದೇ ವೇಳೆ ವಿಜಯ್ ಅವರು ಅಮಿತ್ ಶಾ ಅವರನ್ನು ಸನ್ಮಾನಿಸಿದರು. ಸಭೆಯಲ್ಲಿ ದಕ್ಷಿಣ ಭಾರತದ ಅಭಿವೃದ್ಧಿ ಹಾಗೂ ಪ್ರಮುಖ ಅಂತರ್ರಾಜ್ಯ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.